ಬೀದರ್ ಜಿಲ್ಲೆಯ ಔರಾದ್-ಬಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಹೊಲದಲ್ಲಿ ಅಕ್ರಮವಾಗಿ ಬೆಳೆದಿದ್ದ ₹30 ಲಕ್ಷಕ್ಕೂ ಅಧಿಕ ಮೌಲ್ಯದ ಗಾಂಜಾ ಗಿಡಗಳನ್ನು ವಶಪಡಿಸಿಕೊಂಡಿದ್ದಾರೆ. ಕಾರ್ಯಾಚರಣೆಯಲ್ಲಿ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ.
ಮಾನ್ಯ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಪ್ರದೀಪ್ ಗುಂಟಿ, ಐಪಿಎಸ್ ಅವರ ನೇರ ನಿರ್ದೇಶನ ಹಾಗೂ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ-1 ಶ್ರೀ ಚಂದ್ರಕಾಂತ ಪೂಜಾರಿ ಮತ್ತು ಭಾಲ್ಕಿ ಉಪವಿಭಾಗದ ಡಿವೈಎಸ್ಪಿ ಶ್ರೀ ಬಲ್ಲಪ್ಪ ನಂದಗಾಂವಿ ಅವರ ಮುಂದಾಳತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಔರಾದ್-ಬಿ ವೃತ್ತದ ಸಿಪಿಐ ಶ್ರೀ ರಘುವೀರಸಿಂಗ್ ಠಾಕೂರ್ ಅವರ ನೇತೃತ್ವದಲ್ಲಿ ಪಿಎಸ್ಐ ಶ್ರೀ ವಸೀಮ್ ಪಟೇಲ್, ಪೊಲೀಸ್ ಸಿಬ್ಬಂದಿ ಹಾಗೂ ಅಧಿಕಾರಿಗಳ ತಂಡವು ಖಂಡಿಕೇರಿ ಗ್ರಾಮದ ಹೊಲದ ಮೇಲೆ ದಾಳಿ ನಡೆಸಿದೆ.
ಈ ವೇಳೆ ಸರ್ಕಾರದ ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ಬೆಳೆದಿದ್ದ 100 ಹಸಿ ಗಾಂಜಾ ಗಿಡಗಳನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಔರಾದ್ (ಬಿ) ತಹಸೀಲ್ದಾರರ ಸಮಕ್ಷಮದಲ್ಲಿ ಗಾಂಜಾ ಗಿಡಗಳನ್ನು ಕಿತ್ತು ವಶಕ್ಕೆ ಪಡೆಯಲಾಗಿದ್ದು, ಅವುಗಳ ಒಟ್ಟು ತೂಕ 60 ಕೆಜಿ 430 ಗ್ರಾಂ ಎಂದು ಅಂದಾಜಿಸಲಾಗಿದೆ.
ವಶಪಡಿಸಿಕೊಂಡ ಗಾಂಜಾದ ಅಂದಾಜು ಮೌಲ್ಯ ₹30,21,500 ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ, ಕಾನೂನು ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಮೆಚ್ಚಿ ಶ್ಲಾಘಿಸಿದ್ದಾರೆ.
ಪೊಲೀಸರ ಖಡಕ್ ಎಚ್ಚರಿಕೆ:
ಮಾದಕ ವಸ್ತುಗಳನ್ನು ಬೆಳೆಸುವುದು, ಸೇವಿಸುವುದು ಅಥವಾ ಅಕ್ರಮವಾಗಿ ಸರಬರಾಜು ಮಾಡುವುದು ಕಾನೂನುಬಾಹಿರ ಅಪರಾಧವಾಗಿದೆ. ಇಂತಹ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಸಿದ್ದಾರೆ.
ಬೀದರ್ ಜಿಲ್ಲೆಯನ್ನು ನಶಾಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಪೊಲೀಸರ ಕಾರ್ಯಾಚರಣೆ ಮುಂದುವರಿಯಲಿದೆ. ಸಾರ್ವಜನಿಕರು ಯಾವುದೇ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸದೆ, ತಮ್ಮ ಹಾಗೂ ತಮ್ಮ ಕುಟುಂಬದ ಭವಿಷ್ಯವನ್ನು ಸುರಕ್ಷಿತವಾಗಿರಿಸಿಕೊಳ್ಳುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.







