ನಕಲಿ ಕೀಗಳನ್ನು ಬಳಸಿ ಮನೆ ಕನ್ನ ಕಳವು ಮಾಡುತ್ತಿದ್ದ ಓರ್ವ ವ್ಯಕ್ತಿ ಸೇರಿದಂತೆ ಇಬ್ಬರನ್ನು ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಮಡಿವಾಳ ಪೊಲೀಸ್ ಠಾಣೆಯ ವ್ಯಾಪ್ತಿಯ ವೆಂಕಟಾಪುರ, ಕೋರಮಂಗಲ 1ನೇ ಹಂತದಲ್ಲಿ ವಾಸವಿರುವ ಪಿರಾದುದಾರರು ತಮ್ಮ ಮನೆಯ ಮುಖ್ಯ ಬಾಗಿಲನ್ನು ಲಾಕ್ ಮಾಡಿ, ಕೀಯನ್ನು ಬಾಗಿಲಿನಲ್ಲೇ ಮರೆತು ಮಲಗಿದ್ದರು. ಬೆಳಗ್ಗೆ 6:00 ಗಂಟೆಗೆ ಮನೆ ಮಾಲೀಕರು ಎದ್ದು ನೋಡಿದಾಗ,ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಪ್ರಕರಣದ ತನಿಖೆಯನ್ನು ಕೈಗೊಂಡ ಪೊಲೀಸರು, ಭಾತ್ಮೀದಾರರಿಂದ ಮಾಹಿತಿ ಸಂಗ್ರಹಿಸಿ, ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ವಿ.ಪಿ. ರಸ್ತೆಯ ಆಂಜನೇಯ ದೇವಸ್ಥಾನದ ಬಳಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡರು. ಆತನ ಬಳಿ ಕಳವು ಮಾಡಿದ್ದ 1 ಜೊತೆ ಚಿನ್ನದ ಕಿವಿಯ ಓಲೆ (3 ಗ್ರಾಂ) ಪತ್ತೆಯಾಗಿದೆ. ವಿಚಾರಣೆ ವೇಳೆ, ಆರೋಪಿಯು ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಕಳವು ಮಾಡಿದ ಆಭರಣಗಳನ್ನು ಮತ್ತೋರ್ವ ವ್ಯಕ್ತಿಗೆ ನೀಡುತ್ತಿರುವುದಾಗಿ ತಿಳಿಸಿದ್ದು, ಅದೇ ದಿನ ಆತನ ಮಾಹಿತಿ ಮೇರೆಗೆ ಮತ್ತೋರ್ವ ವ್ಯಕ್ತಿಯನ್ನು ಸಹ ಬಂಧಿಸಲಾಗಿದೆ.
ಬಂಧಿತರಿಂದ ಒಟ್ಟು 779 ಗ್ರಾಂ ಚಿನ್ನಾಭರಣಗಳು, 100 ಗ್ರಾಂ ಬೆಳ್ಳಿಯ ವಸ್ತುಗಳು ಮತ್ತು ಕೃತ್ಯಕ್ಕೆ ಬಳಸಿದ್ದ 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರೊಟ್ಟಿಗೆ ನಕಲಿ ಕೀಗಳನ್ನು ತಯಾರಿಸುವ ಸಲಕರಣೆಗಳು ಹಾಗೂ 138 ನಕಲಿ ಕೀಗಳೂ ಸೇರಿದ್ದವು. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 75 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಈ ಇಬ್ಬರು ಆರೋಪಿಗಳ ಬಂಧನದಿಂದ ಒಟ್ಟು 13 ಮನೆ ಕಳವು ಪ್ರಕರಣಗಳು ಪತ್ತೆಯಾಗಿವೆ. ಅವುಗಳಲ್ಲಿ, ಮಡಿವಾಳ ಪೊಲೀಸ್ ಠಾಣೆಯ 3 ಪ್ರಕರಣಗಳು, ಹುಳಿಮಾವು ಪೊಲೀಸ್ ಠಾಣೆಯ 3 ಪ್ರಕರಣಗಳು, ಮೈಕೋಲೇಔಟ್ ಪೊಲೀಸ್ ಠಾಣೆಯ 1 ಪ್ರಕರಣ, ಮಹದೇವಪುರ ಪೊಲೀಸ್ ಠಾಣೆಯ 1 ಪ್ರಕರಣ, ಬಂಡೇಪಾಳ್ಯ ಪೊಲೀಸ್ ಠಾಣೆಯ 1 ಪ್ರಕರಣ, ಸುಬ್ರಮಣ್ಯಪುರ ಪೊಲೀಸ್ ಠಾಣೆಯ 1 ಪ್ರಕರಣ, ಹೆಚ್.ಎಸ್.ಆರ್. ಲೇಔಟ್ ಪೊಲೀಸ್ ಠಾಣೆಯ 1 ಪ್ರಕರಣ, ಆರ್.ಆರ್. ನಗರ ಪೊಲೀಸ್ ಠಾಣೆಯ 1 ಪ್ರಕರಣ, ಮತ್ತು ಬೇಗೂರು ಪೊಲೀಸ್ ಠಾಣೆಯ 1 ಪ್ರಕರಣ ಸೇರಿವೆ.
ಈ ಯಶಸ್ವಿ ಕಾರ್ಯಾಚರಣೆಯನ್ನು ಬೆಂಗಳೂರು ನಗರ, ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ ಸಾರಾ ಫಾತಿಮಾ, ಐ.ಪಿ.ಎಸ್., ಮತ್ತು ಮಡಿವಾಳ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ವಾಸುದೇವ್ ವಿ.ಕೆ. ಇವರ ಮಾರ್ಗದರ್ಶನದಲ್ಲಿ, ಮಡಿವಾಳ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ಮೊಹಮ್ಮದ್ ಎಂ.ಎ. ಹಾಗೂ ಇತರೆ ಅಧಿಕಾರಿ ಮತ್ತು ಸಿಬ್ಬಂದಿಯವರ ತಂಡವು ಪ್ರಕರಣವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದೆ.
ವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್









