ನಗರದಲ್ಲಿ ದ್ವಿಚಕ್ರ ವಾಹನ ಮತ್ತು ಆಟೋರಿಕ್ಷಾ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ಇಬ್ಬರು ಪ್ರತ್ಯೇಕ ಕಳ್ಳರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸಿದ್ದಾಪುರ ಮತ್ತು ಆವಲಹಳ್ಳಿ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳನ್ನು ಭೇದಿಸುವಲ್ಲಿ ಈ ಬಂಧನಗಳು ಸಹಕಾರಿಯಾಗಿವೆ. ಈ ಕಾರ್ಯಾಚರಣೆಗಳಲ್ಲಿ ಒಟ್ಟು 31 ದ್ವಿಚಕ್ರ ವಾಹನಗಳು, 2 ಆಟೋರಿಕ್ಷಾಗಳು ಮತ್ತು 22.7 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ 30 ಲಕ್ಷಎಂದು ಅಂದಾಜಿಸಲಾಗಿದೆ.
ಸಿದ್ದಾಪುರ ಪೊಲೀಸರು ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಹ್ಯಾಂಡಲ್ ಲಾಕ್ ಮುರಿದು ಕಳವು ಮಾಡುತ್ತಿದ್ದ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈ ಬಂಧನದಿಂದ ಒಟ್ಟು 18 ಕಳವು ಪ್ರಕರಣಗಳು ಭೇದಿಸಲ್ಪಟ್ಟಿವೆ. ಇವುಗಳಲ್ಲಿ ಸಿದ್ದಾಪುರ, ವಿಲ್ಸನ್ ಗಾರ್ಡನ್, ಶೇಷಾದ್ರಿಪುರಂ, ಆಡುಗೋಡಿ, ಕೆ.ಆರ್. ಪುರಂ, ಕೆಂಗೇರಿ, ಕುಂಬಳಗೋಡು, ಡಿ.ಜೆ.ಹಳ್ಳಿ, ಅಶೋಕನಗರ, ತಿಲಕನಗರ, ಬ್ಯಾಟರಾಯನಪುರ, ಚಾಮರಾಜಪೇಟೆ, ಜಯನಗರ ಮತ್ತು ಪೀಣ್ಯ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳು ಸೇರಿವೆ. ವಶಪಡಿಸಿಕೊಂಡ ಉಳಿದ ಎರಡು ದ್ವಿಚಕ್ರ ವಾಹನಗಳ ಮಾಲೀಕರನ್ನು ಪತ್ತೆಹಚ್ಚುವ ಕಾರ್ಯ ಮುಂದುವರಿದಿದೆ.
ಈ ಕಾರ್ಯಾಚರಣೆಯನ್ನು ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಲೋಕೇಶ್ ಭರಮಪ್ಪ ಜಗಲಾಸರ್ಮತ್ತು ಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ವಿ. ನಾರಾಯಣಸ್ವಾಮಿ ಅವರ ಮಾರ್ಗದರ್ಶನದಲ್ಲಿ ಸಿದ್ದಾಪುರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಮೋಹನ್ ಡಿ. ಪಟೇಲ್ ಮತ್ತು ತಂಡ ನಡೆಸಿದೆ.
ಇನ್ನೊಂದು ಪ್ರಕರಣದಲ್ಲಿ ಆವಲಹಳ್ಳಿ ಪೊಲೀಸರು ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಈ ಬಂಧನದಿಂದ ಆವಲಹಳ್ಳಿ, ಕೆ.ಆರ್. ಪುರಂ, ರಾಮಮೂರ್ತಿ ನಗರ ಮತ್ತು ಹೆಣ್ಣೂರು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 8 ಕಳವು ಪ್ರಕರಣಗಳು ಭೇದಿಸಲ್ಪಟ್ಟಿವೆ. ವಶಪಡಿಸಿಕೊಂಡ ಉಳಿದ 4 ದ್ವಿಚಕ್ರ ವಾಹನಗಳ ಮಾಲೀಕರ ಮತ್ತು ತಲೆಮರೆಸಿಕೊಂಡಿರುವ ಮತ್ತೊಬ್ಬ ಸಹಚರನ ಪತ್ತೆಕಾರ್ಯ ಮುಂದುವರಿದಿದೆ.
ಈ ಕಾರ್ಯಾಚರಣೆಯನ್ನು ವೈಟ್ಫೀಲ್ಡ್ ಉಪ ಪೊಲೀಸ್ ಆಯುಕ್ತರಾದ ಕೆ. ಪರಶುರಾಮ್ ಮತ್ತು ಸಹಾಯಕ ಪೊಲೀಸ್ ಆಯುಕ್ತರಾದ ರೀನಾ ಸುವರ್ಣ ಅವರ ಮಾರ್ಗದರ್ಶನದಲ್ಲಿ ಆವಲಹಳ್ಳಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಮಕೃಷ್ಣ ರೆಡ್ಡಿ ಮತ್ತು ತಂಡ ಯಶಸ್ವಿಯಾಗಿ ನಡೆಸಿದೆ.
ವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್









