ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಭಾರಿ ಕನ್ನ ಕಳವು ಪ್ರಕರಣವೊಂದನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಕಾಶಿ ತೀರ್ಥಯಾತ್ರೆಗೆ ತೆರಳಿದ್ದ ಪಿರ್ಯಾದುದಾರರ ಮನೆಯ ಬಾಗಿಲು-ಕಿಟಕಿ ಮುರಿದು ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅವರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಸ್ವತ್ತನ್ನು ಜಪ್ತಿ ಮಾಡಿದ್ದಾರೆ.
ಕಳೆದ ಮಾರ್ಚ್ 20 ರಂದು ಬ್ಯಾಡರಹಳ್ಳಿಯ ಡಿ ಗ್ರೂಪ್ ಲೇಔಟ್ ನಿವಾಸಿಯೊಬ್ಬರು ಕುಟುಂಬ ಸಮೇತ ಕಾಶಿ ತೀರ್ಥಯಾತ್ರೆಗೆ ತೆರಳಿದ್ದರು. ಇದನ್ನು ಸಂಚು ಮಾಡಿದ ಕಳ್ಳರು, ಮನೆಯ ಬಾಗಿಲು ಮತ್ತು ಕಿಟಕಿಯನ್ನು ಹೊಡೆದು ಒಳಪ್ರವೇಶಿಸಿ ಬೀರುವಿನಲ್ಲಿದ್ದ ಚಿನ್ನ, ಬೆಳ್ಳಿ ಹಾಗೂ ನಗದನ್ನು ದೋಚಿ ಪರಾರಿಯಾಗಿದ್ದರು. ಮಾರ್ಚ್ 28 ರಂದು ಮಾಲೀಕರು ಮನೆಗೆ ವಾಪಸ್ ಬಂದಾಗ ಕಳ್ಳತನ ಬೆಳಕಿಗೆ ಬಂದಿದ್ದು, ಬ್ಯಾಡರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಈ ನಡುವೆ ಚಿಕ್ಕಮಗಳೂರಿನ ಲಕ್ಕವಳ್ಳಿ ಠಾಣೆ ಪ್ರಕರಣವೊಂದರಲ್ಲಿ ಭಾಗಿಯಾಗಿ ಜಿಲ್ಲಾ ಕಾರಾಗೃಹದಲ್ಲಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಾಡಿ ವಾರೆಂಟ್ ಮುಖೇನ ಏಪ್ರಿಲ್ 28 ರಂದು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ವಿಚಾರಣೆಯ ವೇಳೆ ಆರೋಪಿಗಳು ಕದ್ದ ಮಾಲನ್ನು ಮಂಗಳೂರಿನ ಜ್ಯೂವೆಲ್ಲರಿ ಅಂಗಡಿಯೊಂದರಲ್ಲಿ ಮಾರಾಟ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಮೇ 7 ರಂದು ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಪೊಲೀಸರು 470 ಗ್ರಾಂ ಚಿನ್ನಾಭರಣ, 750 ಗ್ರಾಂ ಬೆಳ್ಳಿಯ ವಸ್ತುಗಳು Rs.21.43 ಲಕ್ಷ ನಗದು ಹಣ ,01 ದ್ವಿಚಕ್ರ ವಾಹನ, ಒಟ್ಟು ಮೌಲ್ಯ: Rs.64,73,000/- ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಇಬ್ಬರು ಆರೋಪಿಗಳ ಬಂಧನದಿಂದ ಬ್ಯಾಡರಹಳ್ಳಿ ಹಾಗೂ ಪೀಣ್ಯ ಪೊಲೀಸ್ ಠಾಣೆಯ ತಲಾ ಒಂದು ಕನ್ನ ಕಳವು ಪ್ರಕರಣಗಳು ಪತ್ತೆಯಾದಂತಾಗಿದೆ. ಆರೋಪಿಗಳನ್ನು ಸದ್ಯ ಮರಳಿ ಚಿಕ್ಕಮಗಳೂರು ಜಿಲ್ಲಾ ಕಾರಾಗೃಹಕ್ಕೆ ಒಪ್ಪಿಸಲಾಗಿದೆ.
ವಾಯುವ್ಯ ವಿಭಾಗದ ಡಿಸಿಪಿ ಶ್ರೀ ನಾಗೇಶ್ ಡಿ.ಎಲ್. ಅವರ ಮಾರ್ಗದರ್ಶನದಲ್ಲಿ ಹಾಗೂ ಪೀಣ್ಯ ಉಪವಿಭಾಗದ ಎಸಿಪಿ ಶ್ರೀ ಅಶೋಕ್ ಎಂ.ಎಸ್. ನೇತೃತ್ವದಲ್ಲಿ, ಬ್ಯಾಡರಹಳ್ಳಿ ಇನ್ಸ್ಪೆಕ್ಟರ್ ಶ್ರೀ ಸಿ. ಭಾಸ್ಕರ್ ಮತ್ತು ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಇಲಾಖೆಯ ಶ್ಲಾಘನೆಗೆ ಪಾತ್ರವಾಗಿದೆ.







