ಗ್ರಾಹಕರ ಸೋಗಿನಲ್ಲಿ ಬಂದು ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದ ಇಬ್ಬರು ಖತರ್ನಾಕ್ ಕಳ್ಳರನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಬಂಧಿತರಿಂದ ಬರೋಬ್ಬರಿ 1 ಕೋಟಿ 64 ಲಕ್ಷ ರೂಪಾಯಿ ಮೌಲ್ಯದ 1 ಕೆಜಿ 8 ಗ್ರಾಂ ಚಿನ್ನದ ಗಟ್ಟಿ ಹಾಗೂ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಳೆದ ಮೇ 16 ರಂದು ಅವೆನ್ಯೂ ರಸ್ತೆಯ ಚಿಕ್ಕಪೇಟೆ ನಿವಾಸಿಯೊಬ್ಬರು ಮಲ್ಲೇಶ್ವರಂ ಠಾಣೆಗೆ ದೂರು ನೀಡಿದ್ದರು. ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿರುವ ಎಂಟರ್ಪ್ರೈಸಸ್ವೊಂದರ ಮ್ಯಾನೇಜರ್ ಮತ್ತು ಸಿಬ್ಬಂದಿ, ತಮಗೆ ಸಗಟು ದರದಲ್ಲಿ ಚಿನ್ನಾಭರಣ ಬೇಕೆಂದು ನಂಬಿಸಿ ಸುಮಾರು 1 ಕೆಜಿ 514 ಗ್ರಾಂ ಚಿನ್ನವನ್ನು ಕಛೇರಿಗೆ ತರಿಸಿಕೊಂಡಿದ್ದರು. ಬಳಿಕ ಆಭರಣಗಳ ಫೋಟೋ ತೆಗೆದುಕೊಳ್ಳುವ ನೆಪದಲ್ಲಿ ಇಡೀ ಚಿನ್ನದೊಂದಿಗೆ ಅಲ್ಲಿಂದ ಕಾಲ್ಕಿತ್ತಿದ್ದರು. ಈ ಸಂಬಂಧ ಮಲ್ಲೇಶ್ವರಂ ಠಾಣೆಯಲ್ಲಿ ವಂಚನೆ ಮತ್ತು ಕಳವು ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ಆರಂಭಿಸಿದ್ದರು. ಮೇ 18 ರಂದು ಶೇಷಾದ್ರಿಪುರಂನ ಆನಂದ್ ರಾವ್ ಸರ್ಕಲ್ ಫ್ಲೈ ಓವರ್ ಬಳಿ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಮೊದಲ ಆರೋಪಿಯನ್ನು ವಶಕ್ಕೆ ಪಡೆದರು. ಆತನನ್ನು ಸುದೀರ್ಘ ವಿಚಾರಣೆಗೊಳಪಡಿಸಿದಾಗ ಈ ಕೃತ್ಯದಲ್ಲಿ ಮಹಾರಾಷ್ಟ್ರದ ನಂಟಿರುವುದು ಬೆಳಕಿಗೆ ಬಂದಿದೆ.
ತಕ್ಷಣ ಕಾರ್ಯಪ್ರವೃತ್ತರಾದ ಬೆಂಗಳೂರು ಪೊಲೀಸರು ಮುಂಬೈಗೆ ಧಾವಿಸಿ, ಅಲ್ಲಿನ ಪ್ರಾರ್ಥನಾ ಸಮಾಜದ ಬಳಿ ಮತ್ತೊಬ್ಬ ಸಹಚರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಇಬ್ಬರು ಆರೋಪಿಗಳು ಕದ್ದ ಚಿನ್ನದ ಪೈಕಿ 220 ಗ್ರಾಂ ಚಿನ್ನವನ್ನುಮುಂಬೈನ ಜವೇರಿ ಬಜಾರ್ನಲ್ಲಿ ಮಾರಾಟ ಮಾಡಿದ್ದರು. ಪೊಲೀಸರು ಅಲ್ಲಿಂದಲೇ ಆ ಚಿನ್ನವನ್ನು ಗಟ್ಟಿಯ ರೂಪದಲ್ಲಿ ವಶಪಡಿಸಿಕೊಂಡಿದ್ದಾರೆ.
ಇಷ್ಟೇ ಅಲ್ಲದೆ, ಉಳಿದ ಚಿನ್ನಾಭರಣಗಳನ್ನು ಆರೋಪಿಗಳು ಬೆಂಗಳೂರಿನ ಚಿಕ್ಕಪೇಟೆ, ಅವಲಹಳ್ಳಿ ಮತ್ತು ಗುಟ್ಟಹಳ್ಳಿಯಲ್ಲಿರುವ ತಮ್ಮ ಸ್ನೇಹಿತರ ಮನೆಗಳಲ್ಲಿ ಬಚ್ಚಿಟ್ಟಿದ್ದರು. ಪೊಲೀಸರು ಸತತ ಕಾರ್ಯಾಚರಣೆ ನಡೆಸಿ ಅಲ್ಲಿಂದಲೂ 788 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಸ್ತುತ ಕೋರ್ಟ್ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಈ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಮತ್ತಿಬ್ಬರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಬಿ.ಎಸ್. ನೇಮಗೌಡ ಅವರ ಮಾರ್ಗದರ್ಶನದಲ್ಲಿ ಹಾಗೂ ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ ಶ್ರೀಮತಿ ಪ್ರಭಾವತಿ ಪಾಂಡುರಂಗ ಅವರ ನೇತೃತ್ವದಲ್ಲಿ, ಮಲ್ಲೇಶ್ವರಂ ಇನ್ಸ್ಪೆಕ್ಟರ್ ಶ್ರೀಮತಿ ಭಾಗ್ಯವತಿ ಜೆ. ಬಂಟಿ ಮತ್ತು ಅವರ ದಕ್ಷ ಸಿಬ್ಬಂದಿ ವರ್ಗ ಈ ಭರ್ಜರಿ ಕಾರ್ಯಾಚರಣೆಯನ್ನು ನಡೆಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.









