ಬಂಧಿತನಿಂದ 40 ಗ್ರಾಂ ತೂಕದ ಚಿನ್ನದ ಮಾಂಗಲ್ಯ ಸರ ವಶ.ವಶಪಡಿಸಿಕೊಂಡ ಚಿನ್ನದ ಮೌಲ್ಯ ಸುಮಾರು 6,22,600/-.ಕಾರ್ಯಾಚರಣೆ ನಡೆಸಿದ ಹೆಬ್ಬಗೋಡಿ ಪೊಲೀಸರು.
ಬೆಂಗಳೂರಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಗಳ್ಳತನ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಬೇಧಿಸಿದ್ದಾರೆ. ಕಳೆದ ಫೆಬ್ರವರಿ 2 ರಂದು ಸಂಜೆ ಕಾಚನಾಯಕನಹಳ್ಳಿಯ ಶ್ರೀ ಬಾಲಾಜಿ ಶುದ್ಧ ನೀರಿನ ಘಟಕದ ಬಳಿ ಮಹಿಳೆಯೊಬ್ಬರು ತಮ್ಮ ಮಕ್ಕಳೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ, ಹಿಂಬದಿಯಿಂದ ಬಂದ ಅಪರಿಚಿತ ವ್ಯಕ್ತಿಯೊಬ್ಬರು ಅವರ ಕೊರಳಲ್ಲಿದ್ದ 40 ಗ್ರಾಂ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದರು.
ಪ್ರಕರಣ ದಾಖಲಿಸಿಕೊಂಡ ಹೆಬ್ಬಗೋಡಿ ಪೊಲೀಸರು ತನಿಖೆ ಕೈಗೊಂಡು, ಖಚಿತ ಮಾಹಿತಿಯ ಮೇರೆಗೆ ಕಾಚನಾಯಕನಹಳ್ಳಿಯ ಸರ್ಕಾರಿ ಶಾಲೆ ಬಳಿ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದರು. ವಿಚಾರಣೆಯ ವೇಳೆ ಆತನು ‘ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ’ (Juvenile) ಎಂದು ತಿಳಿದುಬಂದಿದ್ದು, ಕೃತ್ಯವೆಸಗಿರುವುದನ್ನು ಒಪ್ಪಿಕೊಂಡಿದ್ದಾನೆ.
ಬಂಧಿತನಿಂದ ₹ 6,22,600/- ಮೌಲ್ಯದ ಚಿನ್ನದ ಸರವನ್ನು ವಶಪಡಿಸಿಕೊಳ್ಳಲಾಗಿದ್ದು, ಬಾಲಕನನ್ನು ಮಾನ್ಯ ಬಾಲ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಡಿಸಿಪಿ ನಾರಾಯಣ ಎಂ ಮತ್ತು ಎಸಿಪಿ ಕೆ.ಎಂ.ಸತೀಶ್ ಅವರ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಸೋಮಶೇಖರ್ ಜಿ ಮತ್ತು ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ.









