ಯಲಹಂಕದ ಜೂಡಿಷಿಯಲ್ ಲೇಔಟ್ನಲ್ಲಿ ನಡೆದಿದ್ದ ಬೃಹತ್ ಕಳವು ಪ್ರಕರಣವನ್ನು ಭೇದಿಸಿರುವ ಈಶಾನ್ಯ ವಿಭಾಗದ ಪೊಲೀಸರು, ರಾಜಸ್ಥಾನದ ಉದಯಪುರ ಮೂಲದ ಆರೋಪಿಯನ್ನು ಬಂಧಿಸಿ ಬರೋಬ್ಬರಿ 3 ಕೋಟಿರೂಪಾಯಿ ಮೌಲ್ಯದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.
ಯಲಹಂಕದ ಮನೆಯ ಮಾಲೀಕರು ಅಮೆರಿಕಾದಲ್ಲಿದ್ದ ಸಮಯ ಸಾಧಿಸಿದ ಕಳ್ಳರು, ಫೆಬ್ರವರಿ 15ರಂದು ಟೆರೇಸ್ ಬಾಗಿಲು ಮುರಿದು ಒಳನುಗ್ಗಿದ್ದರು. ಮನೆಯಲ್ಲಿದ್ದ ಅಪಾರ ಪ್ರಮಾಣದ ವಜ್ರ ಹಾಗೂ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಯಲಹಂಕ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ತಾಂತ್ರಿಕ ತನಿಖೆ ನಡೆಸಿದ ಪೊಲೀಸರು ಆರೋಪಿ ರಾಜಸ್ಥಾನದ ಮಣಗಿರಿಪಾಲ ಗ್ರಾಮದಲ್ಲಿದ್ದಾನೆಂದು ಪತ್ತೆಹಚ್ಚಿ, ಅಲ್ಲಿಗೆ ತೆರಳಿ ಆತನನ್ನು ಬಂಧಿಸಿದ್ದಾರೆ.ಆರೋಪಿಯ ಮನೆಯಲ್ಲೇ ಬಚ್ಚಿಟ್ಟಿದ್ದ 1 ಕೆಜಿ 833 ಗ್ರಾಂ ತೂಕದ ವಜ್ರ ಮತ್ತು ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.ರಾಜಸ್ಥಾನದ ನ್ಯಾಯಾಲಯದಿಂದ ‘ಟ್ರಾನ್ಸಿಟ್ ವಾರೆಂಟ್’ ಪಡೆದು ಆರೋಪಿಯನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಕಾರ್ಯಾಚರಣೆಯನ್ನು ಈಶಾನ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ.ಜಿ.ಕೆ.ಮಿಥನ್ ಕುಮಾರ್, ಐ.ಪಿ.ಎಸ್. ರವರ ಮಾರ್ಗದರ್ಶನದಲ್ಲಿ, ಯಲಹಂಕ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ನರಸಿಂಹಮೂರ್ತಿ.ಪಿ ರವರ ನೇತೃತ್ವದಲ್ಲಿ, ಯಲಹಂಕ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ.ಎಂ.ಎಲ್.ಕೃಷ್ಣಮೂರ್ತಿ ಹಾಗೂ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.









