ಬೆಂಗಳೂರಿನ ಕೋಣನಕುಂಟೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸರಣಿ ಮನೆಗಳ್ಳತನ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನಿಂದ ಬರೋಬ್ಬರಿ 50 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.ಮೈಸೂರು ಬ್ಯಾಂಕ್ ಕಾಲೋನಿಯ ನಿವಾಸಿಯೊಬ್ಬರು ಕಳೆದ ಏಪ್ರಿಲ್ 18 ರಂದು ಕುಟುಂಬ ಸಮೇತ ಊರಿಗೆ ಹೋಗಿದ್ದ ಸಂದರ್ಭದಲ್ಲಿ ಕಳ್ಳರು ಮನೆಯ ಹಿಂಬಾಗಿಲು ಮುರಿದು ಬೀರುವಿನಲ್ಲಿದ್ದ ಬೆಲೆಬಾಳುವ ಆಭರಣಗಳನ್ನು ದೋಚಿದ್ದರು.ದೂರು ದಾಖಲಿಸಿಕೊಂಡ ಕೋಣನಕುಂಟೆ ಪೊಲೀಸರು ತನಿಖೆ ಕೈಗೊಂಡು, ಏಪ್ರಿಲ್ 29 ರಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಆರೋಪಿಯನ್ನು ವಶಕ್ಕೆ ಪಡೆದರು.

ತೀವ್ರ ವಿಚಾರಣೆ ನಡೆಸಿದ ಪೊಲೀಸರು ಆರೋಪಿ ಮದ್ದೂರಿನ ಜ್ಯುವೆಲ್ಲರಿ ಅಂಗಡಿಗಳಲ್ಲಿ ಅಡವಿಟ್ಟಿದ್ದ ಹಾಗೂ ಮಾರಾಟ ಮಾಡಿದ್ದ 318 ಗ್ರಾಂ ಚಿನ್ನ ಮತ್ತು ಡೈಮಂಡ್ ಆಭರಣಗಳು ಹಾಗೂ 2 ಕೆಜಿ 435 ಗ್ರಾಂ ಬೆಳ್ಳಿಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.ಈತನ ಬಂಧನದಿಂದ ಕೋಣನಕುಂಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಒಟ್ಟು 5 ಮನೆ ಕಳ್ಳತನ ಪ್ರಕರಣಗಳು ಬಯಲಿಗೆ ಬಂದಿವೆ.
ಈ ಕಾರ್ಯಾಚರಣೆಯನ್ನು ನೈರುತ್ಯ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀಮತಿ.ಅನಿತಾ.ಬಿ.ಹದ್ದಣ್ಣನವರ, ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಸುಬ್ರಮಣ್ಯಪುರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ.ಗಿರೀಶ್.ಎಸ್.ಬಿ ರವರ ನೇತೃತ್ವದಲ್ಲಿ, ಕೋಣನಕುಂಟೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಮತ್ತು ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.










